New Delhi News :
ತ್ರಿವರ್ಣ ಧ್ವಜ ಹೊದಿಸಿದ ಪಾರ್ಥಿವ ಶರೀರಕ್ಕೆ ಪಕ್ಷ ಬೇಧ ಮರೆತು ನಾಯಕರು ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಮತ್ತಿತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿನ್ನೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅವರ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಕ್ರವಾರ ಅಂತಿಮ ನಮನ ಸಲ್ಲಿಸಿದರು.
ಅಮೆರಿಕದಲ್ಲಿರುವ ಮನ ಮೋಹನ್ ಸಿಂಗ್ ಅವರ ಮಗಳಿಗಾಗಿ ಕುಟುಂಬ ಕಾಯುತ್ತಿದ್ದು, ಅವರು ಬಂದ ನಂತರ ನಾಳೆ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ನವದೆಹಲಿಯ ನಿವಾಸದಲ್ಲಿಯೇ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಅಲ್ಲಿ ಬೆಳಗ್ಗೆ 8-30 ರಿಂದ 9-30ರವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಲ್ಲಿಂದ ಬೆಳಗ್ಗೆ 9-30ಕ್ಕೆ ಅಂತಿಮ ಯಾತ್ರೆ ಶುರುವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ಸಂಜೆ 5.30ಕ್ಕೆ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಿಡಬ್ಲ್ಯುಸಿ ಸದಸ್ಯರು, ಖಾಯಂ ಮತ್ತು ವಿಶೇಷ ಆಹ್ವಾನಿತರನ್ನು ಒಳಗೊಂಡ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮನ ಮೋಹನ್ ಸಿಂಗ್ ಅವರ ನಿಧನಕ್ಕೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ದೇಶದ ಜನತೆ ಹಾಗೂ ಅಭಿವೃದ್ಧಿಗಾಗಿ ಅವರ ಕೊಡುಗೆ ಯಾವಾಗಲೂ ಗೌರವಯುತವಾದದ್ದು ಎಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರ ಗುರುವಾರ ತಡರಾತ್ರಿ ವಯೋಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.