ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ವಿಶೇಷ ಗೌರವ ಸಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನ ಸ್ಮರಿಸಲು ಮುಂದಾಗಿದೆ. ಎಸ್.ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ ಅವರು ನುಡಿ ನಮನವನ್ನು ಸಲ್ಲಿಸಿದರು.
ಕೃಷ್ಣ ಅವರ ಅಭಿಮಾನಿಗಳು, ಬೆಂಬಲಿಗರು, ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ. ನಾನು 2 ತಿಂಗಳ ಹಿಂದೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೃಷ್ಣರನ್ನ ಭೇಟಿಯಾಗಿ ಯೋಗ ಕ್ಷೇಮ ವಿಚಾರಿಸಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಸ್.ಎಂ ಕೃಷ್ಣ ಅವರು ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರಾಗಿದ್ದರು. ಸ್ಪೀಕರ್, ಸಿಎಂ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಒಂದು ರೀತಿಯ ಸಜ್ಜನ, ಮುತ್ಸದ್ದಿ ರಾಜಕಾರಣಿ ಆಗಿದ್ದರು. ಕೃಷ್ಣ ಅವರ ಕಾಲದಲ್ಲಿ ರಾಜ್ಯ ಕಂಡು ಕೇಳದ ಬರಗಾಲ, ಡಾ. ರಾಜಕುಮಾರ್ ಅಪಹರಣದಂತಹ ಕಠಿಣ ಸವಾಲುಗಳನ್ನ ಎದುರಿಸಿದೆ. ಇಂತಹ ಸಂದರ್ಭವನ್ನ ಎಸ್.ಎಂ ಕೃಷ್ಣ ಅವರು ಬಹಳ ಜಾಣ್ಮೆಯಿಂದ ಬಗೆಹರಿಸಿದ್ದಾರೆ.
ಎಸ್.ಎಂ ಕೃಷ್ಣ ಅವರ ಅಗಲಿಕೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 3 ದಿನ ಶೋಕ ದಿನಾಚರಣೆ ಘೋಷಣೆ ಮಾಡಿದೆ. ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾನು ನಾಳೆ ನಡೆಯುವ ಕೃಷ್ಣ ಅವರ ಅಂತ್ಯಕ್ರಿಯೆಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಾಳೆ ಸಂಜೆ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.