ನವದೆಹಲಿ: ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪುರುಷರಿಗೆ ಕಿರುಕುಳ ನೀಡುವುದನ್ನು ತಡೆಗಟ್ಟುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಪತಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕಿರುಕುಳ ನೀಡದಂತೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಇಂಥದೇ ಪ್ರಕರಣಗಳ ಮೂಲಕ ಪತ್ನಿಯ ಕಿರುಕುಳದಿಂದಾಗಿ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿರುವ ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಈ ಅರ್ಜಿ ಸಲ್ಲಿಕೆಯಾಗಿರುವುದು ಗಮನಾರ್ಹ.
ಇತ್ತೀಚೆಗೆ ಬೆಂಗಳೂರಿನಲ್ಲಿ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಅವರ ದುರಂತ ಆತ್ಮಹತ್ಯೆ ನಂತರ ವೈವಾಹಿಕ ಭಿನ್ನಾಭಿಪ್ರಾಯ, ವರದಕ್ಷಿಣೆ ನಿಷೇಧ ಕಾನೂನುಗಳ ದುರುಪಯೋಗ ಮತ್ತು ಪುರುಷರ ಮಾನಸಿಕ ಆರೋಗ್ಯದ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ವಕೀಲ ವಿಶಾಲ್ ತಿವಾರಿ ಎಂಬವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ವರದಕ್ಷಿಣೆ ನಿಷೇಧ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 498 ಎ ವಿವಾಹಿತ ಮಹಿಳೆಯರನ್ನು ವರದಕ್ಷಿಣೆ ಬೇಡಿಕೆ ಮತ್ತು ಕಿರುಕುಳದಿಂದ ರಕ್ಷಿಸುವ ಉದ್ದೇಶವನ್ನು ಹೊಂದಿವೆ. ಆದರೆ ಈ ಕಾನೂನುಗಳು ಗಂಡನ ಕುಟುಂಬದವರ ವಿರುದ್ಧ ತಮ್ಮ ದುರುದ್ಧೇಶಗಳ ಸಾಧನೆಯ ಅಸ್ತ್ರವಾಗಿ ಮಾರ್ಪಟ್ಟಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಅಸ್ತಿತ್ವದಲ್ಲಿರುವ ವರದಕ್ಷಿಣೆ ಕಾನೂನುಗಳು ಮತ್ತು ಕೌಟುಂಬಿಕ ಹಿಂಸಾಚಾರ ಕಾಯ್ದೆಯನ್ನು ಪರಿಶೀಲಿಸುವ ಮತ್ತು ಸುಧಾರಿಸುವ ಸಮಯ ಬಂದಿದೆ. ಹೀಗೆ ಮಾಡುವುದರಿಂದ ಅವುಗಳ ದುರುಪಯೋಗವನ್ನು ನಿಲ್ಲಿಸಬಹುದು ಮತ್ತು ತಪ್ಪು ಮಾಡದ ಪುರುಷರಿಗೆ ಕಿರುಕುಳವಾಗದಂತೆ ನೋಡಿಕೊಳ್ಳಬಹುದು. ಈ ಮೂಲಕ ವರದಕ್ಷಿಣೆ ಕಾನೂನುಗಳ ನಿಜವಾದ ಉದ್ದೇಶವು ಹಾಳಾಗದಂತೆ ತಡೆಯಬಹುದು ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಅಸ್ತಿತ್ವದಲ್ಲಿರುವ ವರದಕ್ಷಿಣೆ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನುಗಳನ್ನು ಪರಿಶೀಲಿಸಲು, ಸುಧಾರಿಸಲು ಮತ್ತು ಅವುಗಳ ದುರುಪಯೋಗವನ್ನು ತಡೆಗಟ್ಟಲು ಸಲಹೆ ನೀಡಲು ನಿವೃತ್ತ ನ್ಯಾಯಾಧೀಶರು, ವಕೀಲರು ಮತ್ತು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಸಿದ್ಧ ಕಾನೂನು ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲು ನಿರ್ದೇಶನ ನೀಡುವಂತೆ ಮನವಿಯಲ್ಲಿ ಸುಪ್ರೀಂ ಕೋರ್ಟ್ ಅನ್ನು ಕೋರಲಾಗಿದೆ.
ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ 80 ನಿಮಿಷಗಳ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದು, ಅದರಲ್ಲಿ ತನ್ನ ವಿಚ್ಛೇದಿತ ಪತ್ನಿ ಮತ್ತು ಆಕೆಯ ಕುಟುಂಬದವರು ತಮ್ಮ ಮತ್ತು ತಮ್ಮ ಕುಟುಂಬದವರಿಂದ ಹಣ ಸುಲಿಗೆ ಮಾಡಲು ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅತುಲ್ ಸುಭಾಷ್ ಅವರು ತಮ್ಮ 24 ಪುಟಗಳ ಆತ್ಮಹತ್ಯೆ ಪತ್ರದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಟೀಕಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.