Bangalore News:
ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ ಮುಗಿಸಿ ಹೋಗುವಾಗ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಮುನಿರತ್ನ ಅವರನ್ನು ರಕ್ಷಣೆ ಮಾಡಿದ್ದಾರೆ. ಈ ಕೃತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಇಂದು ಲಕ್ಷ್ಮೀ ದೇವಿನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಮುಗಿಸಿ ಕಾರ್ಯಕರ್ತರೊಂದಿಗೆ ಹೊರಬರುವಾಗ ಅಪರಿಚಿತರು ಮೊಟ್ಟೆ ಎಸೆದಿದ್ದಾರೆ.
“ಮೂರು ತಿಂಗಳ ಹಿಂದೆ ವಕೀಲರ ರೂಪದಲ್ಲಿ ಬಂದ ಅಪರಿಚಿತರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ನನ್ನ ಮೇಲೆ ಹಲ್ಲೆ ಯತ್ನ ನಡೆದಿತ್ತು. ಈ ಬಗ್ಗೆ ರಾಷ್ಟ್ರಪತಿ, ಪ್ರಧಾನಿಮಂತ್ರಿ ಹಾಗೂ ಎನ್ಐಎ ಗೆ ದೂರು ನೀಡಿದ್ದೇನೆ. ನನ್ನನ್ನ ಹತ್ಯೆ ಮಾಡಲು ಸಂಚು ರೂಪಿಸಿರುವುದು ಗೊತ್ತಾಗಿದೆ” ಎಂದು ಆರೋಪಿಸಿದರು.ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಖಂಡಿಸಿದ್ದಾರೆ. ಇಂತಹ ದಾಳಿ ಮುನಿರತ್ನಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅವಮಾನ.
ಕಾಂಗ್ರೆಸ್ ಅಧಿಕಾರದಲ್ಲಿರುವ ಕಾರಣ. ಇಂತಹ ದಾಳಿಗಳು ನಡೆಯುತ್ತಿವೆ. ಸಾರ್ವಜನಿಕ ಪ್ರತಿನಿಧಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದು ವಿಜಯೇಂದ್ರ ಹೇಳಿದರು. ಅಷ್ಟೇ ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಸಿಟಿ ರವಿ ಕೂಡ ಘಟನೆಯನ್ನು ಖಂಡಿಸಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮುನಿರತ್ನ “ಇಂದು ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಹಿನ್ನೆಲೆ ಕಾರ್ಯಕ್ರಮಕ್ಕಾಗಿ ಬಂದಿದ್ದೆ. ಅದನ್ನು ಮುಗಿಸಿ ಹೋಗುವಾಗ ದುಷ್ಕರ್ಮಿಗಳು ನನ್ನ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾರೆ. ಇದಕ್ಕೂ ಮುನ್ನ ಗುಪ್ತಚರ ವರದಿ ಪ್ರಕಾರ ನಿಮ್ಮ ಮೇಲೆ ಕೊಲೆಯತ್ನ ದಾಳಿ ನಡೆಯಲಿದೆ. ಹೀಗಾಗಿ ಕಾರಿನಲ್ಲಿ ಕುಳಿತುಕೊಳ್ಳಿ ಎಂದು ಸೂಚಿಸಿದ್ದರು. ಪೊಲೀಸರ ನಿರ್ದೇಶನದಂತೆ ಹೊರಬರುವಾಗ ಈ ಘಟನೆ ಸಂಭವಿಸಿದೆ” ಎಂದು ಹೇಳಿದರು.