ಬೆಂಗಳೂರು: ಮುಡಾ ಹಗರಣ ಸಂಬಂಧ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಅವರು ಇಂದು ಜಾರಿ ನಿರ್ದೇಶನಾಲಯ(ಇ.ಡಿ) ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದರು.
ಇ.ಡಿ ಅಧಿಕಾರಿಗಳು ಸೋಮವಾರ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ತೆರಳಿ ದೀಪಾ ಚೋಳನ್ ಅವರಿಗೆ ನೋಟಿಸ್ ನೀಡಿದ್ದರು. ಮುಡಾ ಪ್ರಾಧಿಕಾರ ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿ ಬರುವುದರಿಂದ ಮುಡಾ ನಿವೇಶನ ಹಂಚಿಕೆ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿ ಯಾರಿದ್ದರು?, ನಿವೇಶನ ಹಂಚಿಕೆ ಹಗರಣ ಆರೋಪ ಕೇಳಿ ಬಂದ ಬಳಿಕ ಮುಡಾದ ಅಧಿಕಾರಿಗಳ ಜತೆ ಸಭೆ ನಡೆಸಿದ್ದಿರಾ?, ನಿವೇಶನ ಹಂಚಿಕೆ ಹಾಗೂ ವಾಪಸ್ ನೀಡುವುದೂ ಸೇರಿ ಇತರೆ ಪ್ರಕ್ರಿಯೆಗಳು ಇಲಾಖೆ ಗಮನಕ್ಕೆ ಇತ್ತೇ? ಅಥವಾ ಗಮನಕ್ಕೆ ಬಂದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲವೇ ಎಂದು ಪ್ರಶ್ನಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿನ್ನೆೆಲೆಯಲ್ಲಿ ಅಗತ್ಯ ದಾಖಲೆಗಳ ಸಮೇತ ಇಂದು ಬೆಳಗ್ಗೆೆ 11 ಗಂಟೆಗೆ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಆಗಮಿಸಿದ ದೀಪಾ ಚೋಳನ್ ಅವರನ್ನು ಸಂಜೆ 7 ಗಂಟೆವರೆಗೂ ವಿಚಾರಣೆಗೆ ಒಳಪಡಿಸಲಾಗಿದೆ.
ದೀಪಾ ಚೋಳನ್ ತೆಗೆದುಕೊಂಡು ಹೋಗಿದ್ದ ದಾಖಲೆಗಳನ್ನು ಇ.ಡಿ ಅಧಿಕಾರಿಗಳು ಪಡೆದುಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಗತ್ಯಬಿದ್ದರೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಬೇಕಾಗುತ್ತದೆ ಎಂದು ಸೂಚಿಸಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.