ನವದೆಹಲಿ: ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟು ಮಾಡಿದರು. ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಒತ್ತಾಯಿಸಿದರು.
ಸಭಾಪತಿ ಜಗದೀಪ್ ಧನ್ಕರ್ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ಪ್ರತಿಪಕ್ಷಗಳ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ಪಕ್ಷಪಾತ ಹಾಗೂ ಪ್ರತಿಪಕ್ಷ ನಾಯಕರು ಮಾತನಾಡಲು ನೀಡುವ ಸಮಯದ ವಿಷಯದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ವಿರುದ್ಧ ಮಂಗಳವಾರ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿವೆ.
ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟು ಮಾಡಿದರು.
ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಒತ್ತಾಯಿಸಿದರು.
ಇದಕ್ಕೆ ಸಭಾಪತಿಗಳು ಒಪ್ಪದೆ, ಪಟ್ಟಿ ಮಾಡಲಾದ ವಿಷಯಗಳ ಕುರಿತು ಚರ್ಚೆಗೆ ಅನುಮತಿ ನೀಡಿದರು. ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗದ್ದಲವನ್ನುಂಟು ಮಾಡಿತು. ಬಳಿಕ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗರೂ ವಿಪಕ್ಷಗಳು ಗದ್ದಲವನ್ನು ಮುಂದುವರೆಸಿದವು. ಹೀಗಾಗಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.
ಸೋಮವಾರ ನಡೆದ ಕಲಾಪದಲ್ಲಿ ಸಭಾಪತಿ ನಡೆದುಕೊಂಡ ರೀತಿಗೆ ಆಕ್ಷೇಪಿಸಿದ್ದ ಪ್ರತಿಪಕ್ಷ ನಾಯಕರು, ಪ್ರಸಕ್ತ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಸಭಾಪತಿ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಪತ್ರಕ್ಕೆ 70 ಸಂಸದರು ಸಹಿ ಹಾಕಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್, ಆರ್ಜೆಡಿ, ಟಿಎಂಸಿ, ಸಿಪಿಐ, ಸಿಪಿಐ(ಎಂ), ಜೆಎಂಎಂ, ಎಎಪಿ, ಡಿಎಂಕೆ, ಮತ್ತು ಸಮಾಜವಾದಿ ಪಕ್ಷ ಸೇರಿ 60ಕ್ಕೂ ಹೆಚ್ಚು ವಿರೋಧ ಪಕ್ಷದ ಸಂಸದರು ಸಹಿ ಹಾಕಿದ್ದು, ಸಹಿ ಹಾಕಿದ ನೋಟಿಸ್ ಅನ್ನು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರತಿಪಕ್ಷಗಳ ಪರವಾಗಿ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸೀರ್ ಹುಸೇನ್ ಅವರು ಸಲ್ಲಿಸಿದ್ದಾರೆ.