ಬೆಂಗಳೂರು: 2024 ನೇ ಸಾಲಿನ ಯುಜಿಸಿಇಟಿ 2ನೇ ಹಂತದ ಸುತ್ತಿನಲ್ಲಿ ಸೀಟು ಹಂಚಿಕೆಯಾದರೂ ಶುಲ್ಕ ಪಾವತಿಸಿ, ಸಂಬಂಧಪಟ್ಟ ಎಂಜಿನಿಯರಿಂಗ್ ಕಾಲೇಜುಗಳಿಗೆ ಒಟ್ಟು 2,348 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೋಟಿಸ್ ಜಾರಿ ಮಾಡಿದೆ.
ಪ್ರತಿಷ್ಠಿತ ಕಾಲೇಜುಗಳು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಈ ಅಭ್ಯರ್ಥಿಗಳು ವರದಿ ಮಾಡಿಕೊಳ್ಳದ ಕಾರಣ ಅವರ ಅನಂತರದ ಮೆರಿಟ್ ವಿದ್ಯಾರ್ಥಿಗಳಿಗೆ ಈ ಸೀಟುಗಳು ಸಿಗದೆ ಅನ್ಯಾಯ ಮಾಡಿದಂತಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.
ನೋಂದಾಯಿತ ಅಭ್ಯರ್ಥಿಗಳಿಗೆ 3 ದಿನಗಳಲ್ಲಿ ಅವರು ಸಮಜಾಯಿಷಿ ನೀಡಬೇಕು ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಇ-ಮೇಲ್ಗೆ ನೋಟಿಸ್ ಕಳುಹಿಸಲಾಗಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸೀಟು ಹಂಚಿಕೆ ಅನಂತರ ಶುಲ್ಕ ಕಟ್ಟದವರು, ಶುಲ್ಕ ಕಟ್ಟಿಯೂ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳದವರು ಹಾಗೂ ಅಪೂರ್ಣ ಶುಲ್ಕ ಕಟ್ಟಿದವರು-ಹೀಗೆ ಒಟ್ಟು 3 ವಿಭಾಗಗಳನ್ನು ಮಾಡಿಕೊಂಡು ನೋಟಿಸ್ ನೀಡಲಾಗಿದೆ.
ಅಭ್ಯರ್ಥಿಗಳು ನೀಡುವ ಉತ್ತರ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿವಿಧ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾಗಿದ್ದರೂ ಒಟ್ಟು 2,208 ಮಂದಿ ಶುಲ್ಕ ಪಾವತಿಸಿಲ್ಲ. 95 ಮಂದಿ ಶುಲ್ಕ ಪಾವತಿಸಿದ್ದರೂ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ಹೋಗಿಲ್ಲ. 45 ಮಂದಿ ಅಲ್ಪಸ್ವಲ್ಪ ಶುಲ್ಕ ಪಾವತಿಸಿದ್ದಾರೆ. ಇಷ್ಟೂ ಮಂದಿಗೆ ನೋಟಿಸ್ ನೀಡಲಾಗಿದೆ ಎಂದು ಪ್ರಸನ್ನ ವಿವರಿಸಿದ್ದಾರೆ.